ಬೆಂಗಳೂರು,ಮಾ. 4-ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಪರ ಘೋಷಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಸಂಬಂಧ ಕೊನೆಗೂ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಗ್ಗೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು,ನವದೆಹಲಿ ಮೂಲದ ಇಲ್ತಾಜ್, ಆರ್.ಟಿ. ನಗರದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿಯನ್ನು ಬಂಧಿಸಿದ್ದಾರೆ.
ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಿದ್ದು ಮತ್ತೆ ಕಸ್ಟಡಿಗೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಲಾಗಿದೆ.
ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಎಂದು ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್, ಜಿಂದಾಬಾದ್ ಎಂದು ಕೂಗುವುದು ಎಫ್ ಎಸ್ ಎಲ್ ವರದಿ ಹಾಗೂ ತನಿಖೆಯಲ್ಲಿ ಧೃಡಪಟ್ಟ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.
ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಪಾಕಿಸ್ತಾನ ಪರ ಘೋಷಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ, 26 ಮಂದಿಯ ಪಟ್ಟಿಯನ್ನು ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ಮಾಡಲಾಗಿತ್ತು, ಮೂವರ ವಾಯ್ಸ್ ಸ್ಯಾಂಪಲ್ಸ್ಗಳನ್ನ ಎಫ್ಎಸ್ಎಲ್ಗೆ ರವಾನೆ ಮಾಡಲಾಗಿತ್ತು. ಮೆಲುಧ್ವನಿ, ಏರುಧ್ವನಿ ಮಾದರಿಯಲ್ಲಿ ಸ್ಯಾಂಪಲ್ಸ್ಗಳನ್ನ ಸಂಗ್ರಹಿಸಲಾಗಿದ್ದು, ಎಫ್ಎಸ್ಎಲ್ ತಂಡ ಪರಿಶೀಲನೆ ಮಾಡಿದೆ. ಘಟನೆ ನಡೆದ ದೃಶ್ಯಗಳನ್ನು ಸಹ ರವಾನಿಸಲಾಗಿತ್ತು.
ಸರ್ಕಾರ ಕೂಡ ಕಟ್ಟುನಿಟ್ಟಿನ ತನಿಖೆಗೆ ಮುಂದಾಗಿದ್ದು, ಎಫ್ಎಸ್ಎಲ್ ಮೇಲೆ ಇಡೀ ಪ್ರಕರಣವೇ ನಿಂತಿದೆ. ಸರ್ಕಾರ ಇನ್ನು ಎಫ್ಎಸ್ಎಲ್ ವರದಿ ಬಂದಿಲ್ಲ ಎಂದಿದ್ದರೆ, ಇತ್ತ ಬಿಜೆಪಿ ನಾಯಕರು ಮಾತ್ರ ನಿನ್ನೆಯೇ ವರದಿ ಬಂದಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಈಗಾಗಲೇ ಎಫ್ಎಸ್ಎಲ್ ವರದಿ ಕಾಂಗ್ರೆಸ್ ಕೈ ಸೇರಿದೆ. ಆದರೆ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ನಡುವೆ
ಎಫ್ಎಸ್ಎಲ್ ವರದಿ ಬಿಡುಗಡೆ ಬಿಜೆಪಿಯವರು ಒತ್ತಾಯಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ವರದಿ ಬಂದ ತಕ್ಷಣವೇ ಬಿಡುಗಡೆ ಮಾಡುತ್ತೇವೆ. ದೇಶಭಕ್ತಿಯನ್ನ ಬಿಜೆಪಿಯವರು ಹೇಳಿಕೊಡುವ ಅಗತ್ಯವಿಲ್ಲ ಅಂತ ಹೇಳಿದ್ದಾರೆ.