ಬೆಂಗಳೂರು.ಜ,6: ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ದೃಷ್ಟಿಯಿಂದ ಮೂವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಬೇಕು ಎಂಬ ವಿಚಾರ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ಹಾಲಿ ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕೈ ಕಟ್ಟಿ ಹಾಕಬೇಕು ಎಂಬ ಏಕೈಕ ಉದ್ದೇಶದಿಂದ ಈ ಬೇಡಿಕೆ ಮಂಡಿಸಲಾಗುತ್ತಿದೆ ಎಂಬ ವರದಿಗಳಿವೆ.
ಅದರಲ್ಲೂ ಮೂವರು ಡಿಸಿಎಂ ಬೇಡಿಕೆ ವಿಚಾರದಲ್ಲಿ ಹಿರಿಯ ಮತ್ತು ಪ್ರಭಾವಿ ಸಚಿವರೆ ಮುಂಚೂಣಿಯ ನಾಯಕರಾಗಿರುವುದು ಹೈಕಮಾಂಡ್ ಗೆ (Congress High Command) ಹೊಸ ತಲೆ ಬಿಸಿ ತಂದೊಡ್ಡಿದೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವರುಷ್ಠರನ್ನು ಭೇಟಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಹಕಾರ ಸಚಿವ ಕೆ ಎನ್ ರಾಜಣ್ಣ ನೇತೃತ್ವದಲ್ಲಿ ತಂಡ ಸಿದ್ಧಗೊಂಡಿದೆ ಎಂಬ ವರದಿಗಳ ಬೆನ್ನಲ್ಲೇ ಇದೀಗ ಹೈಕಮಾಂಡ್ ಮಧ್ಯಪ್ರವೇಶ ಮಾಡಿದೆ.
ಈ ನಾಯಕರು ಅಹವಾಲು ಸಲ್ಲಿಸಲು ದೆಹಲಿಗೆ ಆಗಮಿಸಿದರೆ ಅದು ದೊಡ್ಡ ಸುದ್ದಿಯಾಗಲಿದೆ.ಅಷ್ಟೇ ಅಲ್ಲದೆ ಇದರಿಂದ ಪಕ್ಷ ಮತ್ತು ಸರ್ಕಾರದಲ್ಲಿ ಅನಗತ್ಯ ಗೊಂದಲ ಉಂಟಾಗಲಿದೆ ಎಂದು ಭಾವಿಸಿರುವ ಹೈಕಮಾಂಡ್ ಇದೀಗ ಗೊಂದಲ ಬಗೆಹರಿಸಲು ಮುಂದಾಗಿದೆ.
ತಮ್ಮ ಬೇಡಿಕೆಗಳ ಬಗ್ಗೆ ವರಿಷ್ಠ ಒಳಗೆ ಮನವಿ ಸಲ್ಲಿಸಲು ಸದ್ಯಕ್ಕೆ ಯಾರು ದೆಹಲಿಗೆ ಬರುವುದು ಬೇಡ ಎಂದು ಹೈಕಮಾಂಡ್ ನ ನಾಯಕರು ಸಂದೇಶ ರವಾನಿಸಿದ್ದಾರೆ ಅಷ್ಟೇ ಅಲ್ಲ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸುರ್ಜೇವಾಲ ಜನವರಿ 10ರಂದು ಬೆಂಗಳೂರಿಗೆ ಬರುತ್ತಿದ್ದು ಇಲ್ಲಿಯೇ ಎಲ್ಲ ನಾಯಕರು ಅವರನ್ನು ಭೇಟಿ ಮಾಡಿ ತಮ್ಮ ಆವನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.
ಈ ಮೂಲಕ ಸಕಾಲಿಕ ಮಧ್ಯಪ್ರವೇಶದೊಂದಿಗೆ ಮೂವರು ಡಿಸಿಎಂ ಹುದ್ದೆ ಬಿಕ್ಕಟ್ಟಿಗೆ ಮದ್ದಿಡಲು ತೀರ್ಮಾನಿಸಿದೆ ಗಾಳಿಸುದ್ದಿ:
ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಗಾಳಿಸುದ್ದಿಯಾಗಿದ್ದು, ಈ ಕುರಿತು ಎಲ್ಲಿಯೂ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಡಿಸಿಎಂ ನೇಮಕದ ಬಗ್ಗೆ ಕೆಲವು ಸಚಿವರು ವೈಯಕ್ತಿಕ ಅಭಿಪ್ರಾಯವನ್ನು ಹೇಳಿರುತ್ತಾರೆ. ರಾಜಣ್ಣ ಅವರ ಹೇಳಿಕೆ ಅವರ ದೃಷ್ಟಿಯಲ್ಲಿ ಒಳ್ಳೆಯದು ಇರಬಹುದು. ಹೀಗಾಗಿ ಹೇಳಿರುತ್ತಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದರು.
ಸಚಿವರ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿ, “ಒಬ್ಬೊಬ್ಬರು ಒಂದೊಂದು ಕಾರಣ ಇಟ್ಟುಕೊಂಡು ದೆಹಲಿಗೆ ಹೋಗುತ್ತಾರೆ. ಈ ವೇಳೆ ಪಕ್ಷದ ಮುಖ್ಯ ಕಚೇರಿಗೆ ಹೋಗಿ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡುವುದು, ಸಾಧ್ಯವಾದರೆ ಅಧ್ಯಕ್ಷರ ಜತೆ ಚರ್ಚಿಸುತ್ತಾರೆ. ಆಡಳಿತದಲ್ಲಿರುವಾಗ ಪಕ್ಷದ ಹೈಕಮಾಂಡ್ ಸಲಹೆಗಳನ್ನು ಸ್ವೀಕರಿಸಬೇಕು. ಇದೆಲ್ಲ ಸಾಮಾನ್ಯವಾಗಿ ನಡೆಯುವ ಬೆಳವಣಿಗೆ. ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆಯಿಲ್ಲ” ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನಗೆ ಯಾರು ಹೇಳಿಲ್ಲ. ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಮಾಧ್ಯಮದಲ್ಲಿ ಬಂದಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಹೈಕಮಾಂಡ್ ಸೂಚಿಸಿದರೆ ಮುಂದಿನ ತೀರ್ಮಾನದ ಬಗ್ಗೆ ತಿಳಿಸುತ್ತೇನೆ ಎಂದರು.