ಬೆಂಗಳೂರು,
ಅತಿಯಾದ ಗೀಳು ಹಾಗೂ ತಾಂತ್ರಿಕ ದುಷ್ಪರಿಣಾಮಗಳ ಕುರಿತಂತೆ ತಜ್ಞರ ವರದಿ ನೀಡಿರುವ ಶಿಫಾರಸುಗಳ ಆಧಾರದಲ್ಲಿ ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
16 ವರ್ಷದೊಳಗಿನ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನೋಡಿಕೊಳ್ಳಬೇಕು ಈ ವಯಸ್ಸಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸುಲಭವಾಗಿ ತಪ್ಪು ಹಾದಿಗೆ ಬೀಳುತ್ತಿದ್ದಾರೆ ಅಲ್ಲದೆ ಅತಿಯಾದ ಗೀಳಿನ ಕಾರಣಕ್ಕಾಗಿ ಅನೇಕ ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂದು ತಜ್ಞರ ವರದಿ ಹೇಳಿದೆ.
ಈ ವರದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಬಾ ಗಂಭೀರವಾಗಿ ಪರಿಶೀಲನೆ ನಡೆಸಿದ್ದಾರೆ. ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಗೃಹಮಂತ್ರಿ ಡಾ. ಜಿ ಪರಮೇಶ್ವರ್ ರಾಜ್ಯದಲ್ಲಿ 16 ವರ್ಷದೊಳಗಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿರ್ಬಂಧಿಸಲು ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಸಕ್ತಿ ವಹಿಸಿದ್ದಾರೆ ಎಂದು ಹೇಳಿದರು.
ಮೊಬೈಲ್ ಬಳಕೆಯಿಂದ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ವಯಸ್ಸಿನ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿಷೇಧ ವಿಧಿಸಲು ರಾಜ್ಯ ಸರ್ಕಾರ ತಾತ್ವಿಕವಾಗಿ ತೀರ್ಮಾನ ಕೈಗೊಂಡಿದೆ ಸದ್ಯದಲ್ಲಿಯೇ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊಬೈಲ್ ಬಳಕೆ ಕೇವಲ ಒಂದು ಸಣ್ಣ ಆದೇಶದಿಂದ ಸಾಧ್ಯವಿಲ್ಲ ಈ ಬಗ್ಗೆ ಸಾಧಕ ಬಾಧಕಗಳನ್ನು ಪರಿಶೀಲನೆ ನಡೆಸಬೇಕಾಗಿದೆ ಹೀಗಾಗಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದು ಸದ್ಯದಲ್ಲಿಯೇ ತೀರ್ಮಾನ ಪ್ರಕಟವಾಗಲಿದೆ ಎಂದು ತಿಳಿಸಿದರು
ಇತ್ತೀಚೆಗೆ ನಡೆದ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪ ಆಗಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದಿನ ದಿನಗಳಲ್ಲಿ ಯುವಕರು ಡ್ರಗ್ಸ್ಗೆ ಬಲಿಯಾಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದ ಅತಿಯಾದ ಬಳಕೆ ಕೂಡ ಅವರಿಗೆ ಹಾನಿ ಮಾಡುತ್ತಿದೆ. ಹೀಗಾಗಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಯೋಚನೆ ಇದೆ ಎಂದು ಹೇಳಿದ್ದರು.

