ಬೆಂಗಳೂರು, ಡಿ.11- ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಹಾಗೂ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಅಸಮಾಧಾನಗೊಂಡಿರುವ ಶಾಸಕರ ಅಹವಾಲು ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸಲು ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ ಹಾಗೂ ನಿಗಮ ಮಂಡಳಿಗಳ ನೇಮಕ ಕುರಿತಂತೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪರವಾದ ಅಭಿಪ್ರಾಯ ಮೂಡಿಸಲು ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕು, ಇದಕ್ಕಾಗಿ ಕನಿಷ್ಠ ಐವತ್ತು ಕೋಟಿ ರೂಪಾಯಿ ಅನುದಾನ ನೀಡಬೇಕು ಎಂಬ ಬೇಡಿಕೆ ಮಂಡಿಸಿರುವ ಶಾಸಕರು ಇದಕ್ಕಾಗಿ ಪಟ್ಟು ಹಿಡಿದಿದ್ದಾರೆ.
ಬರಗಾಲದ ಹಿನ್ನೆಲೆಯಲ್ಲಿ ಹಲವು ಕಡೆ ಕುಡಿಯುವ ನೀರು ಮತ್ತು ದನ ಕರುಗಳ ಮೇವಿಗೆ ಹಾಹಾಕಾರ ಉಂಟಾಗಿದೆ ಇದನ್ನು ಪರಿಹರಿಸುವ ದೃಷ್ಟಿಯಿಂದ ಸಮರೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿ ಕೈಗೊಳ್ಳಬೇಕಿದೆ. ಎಂದು ಆಗ್ರಹಿಸಿರುವ ಶಾಸಕರು ಇದಕ್ಕಾಗಿ ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಿದ್ದಾರೆ.
ಇದರ ಜೊತೆಯಲ್ಲಿ ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಪ್ರಾಬಲ್ಯ ಸಾಧಿಸಿರುವುದರಿಂದ ಶಾಸಕರನ್ನು ತಮ್ಮತ್ತ ಸಳೆಯಲು ಬಿಜೆಪಿ ನಾಯಕರು ಪ್ರಯತ್ನ ನಡೆಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಯಾರೂ ಕೂಡ ಆಮೀಷಗಳಿಗೆ ಬಲಿಯಾಗದಂತೆ ಮನವಿ ಮಾಡಲು ತೀರ್ಮಾನಿಸಲಾಗಿದೆ.
ಒಟ್ಟಾರೆಯಾಗಿ ಬಿಜೆಪಿಯ ಆಮಿಷಗಳಿಂದ ಶಾಸಕರನ್ನು ತಡೆಗಟ್ಟುವ ಜೊತೆಗೆ ಅವರ ಕ್ಷೇತ್ರದಲ್ಲಿನ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಅಧಿಕಾರಿಗಳ ವರ್ಗಾವಣೆ ಹಾಲು ಪ್ರಮುಖ ವಿಷಯಗಳು ನಾಳಿನ ಸಭೆಯಲ್ಲಿ ಮಹತ್ವದ ನಿರ್ಧಾರಗಳಾಗುವ ಸಾಧ್ಯತೆ ಇದೆ.