ಹೈದರಾಬಾದ್ – ಲೋಕಸಭೆ ಚುನಾವಣೆಗೆ ಈ ಬಾರಿ ಭರ್ಜರಿ ರಂಗು ಬಂದಿದೆ. ನೆರೆಯ ತೆಲಂಗಾಣದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಬೇಕು ಎಂದು ರಣತಂತ್ರ ರೂಪಿಸುತ್ತಿದೆ.
ಗೆಲ್ಲುವ ಮಾನದಂಡ ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿರುವ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸತತ ಸಮಾಲೋಚನೆ ನಡೆಸಿದ್ದಾರೆ.
ಆಂಧ್ರ ತೆಲಂಗಾಣ ಮಾತ್ರವಲ್ಲ ದೇಶದ ವಿವಿಧತೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿಗೆ ಅನುಕೂಲ ಕಲ್ಪಿಸುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಅಸಾದುುದ್ದೀನ್ ಓವೈಸಿ ಅವರನ್ನು ಸೋಲಿಸಬೇಕು ಎಂದು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಓವೈಸಿ ನೇತೃತ್ವದ ಎಂ ಐ ಎಂ ಪಕ್ಷ ತೆಲಂಗಾಣದಲ್ಲಿ ನಿರೀಕ್ಷಿತ ಸಾಧನೆ ಮಾಡಲು ಸಾಧ್ಯವಾಗಿಲ್ಲ. ಸೋಲಿನ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಓವೈಸಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿದ್ದಾರೆ.
ಇದಕ್ಕೆ ತಿರುಗೇಟು ನೀಡಲು ತಂತ್ರಗಾರಿಕೆ ರೂಪಿಸಿರುವ ಮಾಜಿ ಕ್ರಿಕೆಟಿಗ ಅಜರುದ್ದೀನ್ ತೆಲಂಗಾಣ ಕಾಂಗ್ರೆಸ್ ನಾಯಕರು ಮತ್ತು ಕಳೆದ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣ ಉಸ್ತುವಾರಿ ಯಾಗಿದ್ದ ಕರ್ನಾಟಕದ ಮಂತ್ರಿ ಜಮೀರ್ ಅಹಮದ್ ಖಾನ್ ಅವರೊಂದಿಗೆ ಚರ್ಚಿಸಿ ಇದೀಗ ಓವೈಸಿ ಪ್ರಬಲ ಎದುರಾಳಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.
ಓವೈಸಿ ಪ್ರತಿನಿಧಿಸುತ್ತಿರುವ ಹೈದರಾಬಾದ್ ಲೋಕಸಭಾ ಕ್ಷೇತ್ರ ಕಳೆದ 1980 ರಿಂದ ಕಾಂಗ್ರೆಸ್ ಕೈ ತಪ್ಪಿ ಹೋಗಿದೆ ಈ ಬಾರಿ ಹೇಗಾದರೂ ಮಾಡಿ ಅದನ್ನು ಕೈವಶ ಮಾಡಿಸಕೊಳ್ಳಬೇಕು ಎಂದು ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ನಾಯಕರು ಇದೀಗ ಅಜರುದ್ದೀನ್ ಅವರ ಸಲಹೆ ಮೇರೆಗೆ ಈ ಕ್ಷೇತ್ರದಿಂದ ಖ್ಯಾತ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ.
ಸಾನಿಯಾ ಮಿರ್ಜಾ ಅವರು ಅಜರುದ್ದೀನ್ ಅವರ ಸಂಬಂಧಿಯೂ ಆಗಿದ್ದು ಅವರನ್ನು ಚುನಾವಣೆಗೆ ಸ್ಪರ್ಧಿಸುವಂತೆ ಮನವೊಲಿಸುವಲ್ಲಿ ಅಜರುದ್ದೀನ್ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ತನ್ನ ಸೋದರ ಸಂಬಂಧಿಯಾದ ಅಜರುದ್ದೀನ್ ಅವರ ಸಲಹೆಯಂತೆ ಸಾನಿಯಾ ಮಿರ್ಜಾ ಅವರು ಹೈದರಾಬಾದ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಓವೈಸಿ ವಿರುದ್ಧ ಕಣಕ್ಕಿಳಿಯಲು ಸಿದ್ದ ಎಂಬ ಸಂದೇಶ ರವಾನಿಸಿದ್ದು ಇದೀಗ ಕಾಂಗ್ರೆಸ್ ಹೈಕಮಾಂಡ್ ಈ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಸೋತು ಮೂಲೆಗುಂಪಾಗಿರುವ ಓವೈಸಿ ಅವರನ್ನು ಲೋಕಸಭೆ ಚುನಾವಣೆಯಲ್ಲೂ ಮಣಿಸಿದ್ದೆ ಆದಲ್ಲಿ ಇತರೆ ರಾಜ್ಯಗಳಲ್ಲಿ ಅವರು ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡು ಜಾತ್ಯತೀತ ಮತಗಳು ವಿಭಜನೆಯಾಗುವುದನ್ನು ತಪ್ಪಿಸಬಹುದಾಗಿದೆ ಎಂಬ ವಾದವನ್ನು ತೆಲಂಗಾಣ ಕಾಂಗ್ರೆಸ್ ನಾಯಕರು ಮಂಡಿಸುತ್ತಿದ್ದು ಅದನ್ನು ಹೈಕಮಾಂಡ್ ಯಾವ ರೀತಿ ಸ್ವೀಕರಿಸಲಿದೆ ಎಂಬುದನ್ನು ನೋಡಬೇಕಿದೆ.

