ಬೆಂಗಳೂರು,ಫೆ.24:
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ಸ್ಥಗಿತಗೊಳ್ಳಲಿದೆಯೇ.. ಹೀಗೊಂದು ಅನುಮಾನ ಇದೀಗ ಆವರಿಸಿದೆ.
ವಿದ್ಯುತ್ ದರ ಪರಿಷ್ಕರಣೆಗೆ ಅವಕಾಶ ಕೋರಿ ರಾಜರ ಎಲ್ಲಾ ವಿದ್ಯುತ್ ವಿತರಣಾ ಸಂಸ್ಥೆಗಳು ಕೆಇಆರ್ಸಿ ಗೆ ಮನವಿ ಸಲ್ಲಿಸಿವೆ. ಈ ವೇಳೆ ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆಯ ಬಾಕಿ ಹಣವನ್ನು ಸಕಾಲಕ್ಕೆ ನೀಡುತ್ತಿಲ್ಲ ಇದರಿಂದ ತೊಂದರೆ ಆಗಿದೆ ಎಂದು ಹೇಳಿದ್ದು ಇದಕ್ಕೆ ಪ್ರತಿಕ್ರಿಯಿಸಿರುವ ಕೆಇಆರ್ಸಿ, ಸರ್ಕಾರ ಹಣ ನೀಡದೆ ಹೋದರೆ ಅದನ್ನು ಗ್ರಾಹಕರಿಂದಲೇ ಮಾಡಿಕೊಳ್ಳಲು ಸಲಹೆ ಮಾಡಿದೆ.
ಕೆಇಆರ್ಸಿ ನೀಡಿರುವ ಈ ಸಲಹೆ ಯೋಜನೆ ಮುಂದುವರೆಯುವ ಬಗ್ಗೆ ಅನುಮಾನ ಉಂಟಾಗುವಂತೆ ಮಾಡಿದೆ.
ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಸರ್ಕಾರದಶಬಿಟ್ಟಿ ಭಾಗ್ಯಗಳಲ್ಲಿ ಒಂದಾದ ಗೃಹ ಜ್ಯೋತಿ ನಂದಿಸಲು ಎಸ್ಕಾಂಗಳು ಸನ್ನದ್ಧವಾಗಿವೆ ಎಂದು ಹೇಳಿದ್ದಾರೆ
15 ಬಾರಿ ಬಜೆಟ್ ಮಂಡಿಸಿರುವ ದಾಖಲೆ ತಮ್ಮದೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಿಟ್ಟಿ ಭಾಗ್ಯಗಳಿಗೆ ಹಣ ಸರಿದೂಗಿಸಲು ಸಮತೋಲನ ಕಳೆದುಕೊಂಡಿರುವುದು ಅವರು ಅಧಿಕಾರಕ್ಕೆ ಬಂದ ದಿನದಿಂದಲೂ ಅನಾವರಣಗೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ
ಆರ್ಥಿಕ ದೂರದೃಷ್ಟಿತ್ವವಿಲ್ಲದ, ಬದ್ಧತೆಯಿಲ್ಲದ ಮತ ಬ್ಯಾಂಕ್ ಆಧಾರಿತ ಯೋಜನೆಗಳು ಸೊರಗುತ್ತಿದೆ, ಅಭಿವೃದ್ಧಿ ಎನ್ನುವುದು ಗಗನಕುಸುಮವಾಗಿದೆ, ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರನ್ನು ಹೈರಾಣಾಗಿಸುತ್ತಿದೆ. ಇದರ ನಡುವೆ ಪಂಚ ಗ್ಯಾರಂಟಿಯ ಯೋಜನೆಗಳು ತೋರಿಕೆಗೆ, ಹೇಳಿಕೆಗೆ ಮಾತ್ರ ಎಂಬಂತೆ ಜನರಿಗೆ ತಲುಪುವಲ್ಲಿ ಬಹುತೇಕ ವಿಫಲವಾಗಿವೆ ಎಂದು ದೂರಿದ್ದಾರೆ
ಗೃಹಲಕ್ಷ್ಮಿ ಯೋಜನೆಯ ಹಣ ಸ್ಥಗಿತಗೊಂಡಂತೆ ಕಾಣುತ್ತಿದೆ, ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರದ ಸರ್ಕಾರ ಕೊಡುವ ಗರೀಬ್ ಕಲ್ಯಾಣ್ ಅನ್ನ ಯೋಜನೆಯ 5 ಕೆಜಿ ಅಕ್ಕಿಯ ಹೊರತುಪಡಿಸಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಹೆಚ್ಚುವರಿ 5 ಕೆಜಿಯ ಅಕ್ಕಿಯೂ ಇಲ್ಲ, ಬದಲಾಗಿ ಹಣವೂ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿಲ್ಲ. ಯುವ ನಿಧಿ ಯೋಜನೆ ಅರ್ಜಿ ಕರೆಯುವ ಪ್ರಕಟಣೆಗಳನ್ನು ಬಿಟ್ಟರೆ ಯುವಜನರ ಖಾತೆಗಳಿಗೆ ಜಮೆಯಾದ ಬಗ್ಗೆ ಈವರೆಗೆ ವಿವರಗಳೇ ಲಭ್ಯವಾಗಿಲ್ಲ, ಶಕ್ತಿ ಯೋಜನೆಯಿಂದಾಗಿ ಕೆ.ಎಸ್.ಆರ್.ಟಿ.ಸಿ ಈಗಾಗಲೇ ನಷ್ಟದ ಹಾದಿ ಹಿಡಿದಿದೆ, ಹೆಚ್ಚುವರಿ ದರ ಏರಿಕೆ ಪರೋಕ್ಷವಾಗಿ ಪ್ರಯಾಣಿಕರ ಮೇಲೆ ಹೇರಲಾಗಿದೆ. ಇದೀಗ ಗೃಹ ಜ್ಯೋತಿ ಯೋಜನೆಗೆ ಸರ್ಕಾರ ಎಸ್ಕಾಂ ಗಳಿಗೆ ಹಣ ಪಾವತಿಸದ ಪರಿಣಾಮ ಯೋಜನೆ ಫಲಾನುಭವಿಗಳಿಂದಲೇ ವಸೂಲಿ ಮಾಡುವುದಕ್ಕಾಗಿ ಅಧಿಕಾರಿಗಳು ಸಜ್ಜಾಗಿ ನಿಂತಿದ್ದಾರೆ. ಆ ಮೂಲಕ ಗೃಹ ಜ್ಯೋತಿಗೆ ಇತಿಶ್ರೀ ಆಡುವ ಮುನ್ಸೂಚನೆ ನೀಡಿದ್ದಾರೆ ಎಂದು ಆಪಾದಿಸಿದ್ದಾರೆ
ಪಂಚ ಭಾಗ್ಯಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೇವಲ ಒಂದೂವರೆ ವರ್ಷದಲ್ಲೇ ಯೋಜನೆಗಳನ್ನು ಕಾರ್ಯಗತ ಮಾಡುವಲ್ಲಿ ಸಂಪೂರ್ಣ ಎಡವಿದೆ ಹಾಗೂ ಸರ್ಕಾರದ ಆಡಳಿತ ವ್ಯವಸ್ಥೆ ನಿಷ್ಕ್ರಿಯಗೊಂಡಿದ್ದು, ಕೃಷಿ ಸೇರಿದಂತೆ ಯಾವುದೇ ಕ್ಷೇತ್ರಗಳ ಅಭಿವೃದ್ಧಿಗೂ ಬಿಡಿಗಾಸು ಇಲ್ಲದೆ ಬರಿಗೈಯಲ್ಲಿ ಕೈ ಚಾಚಿ ಕುಳಿತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ವಿಷಾದಿಸಿದ್ದಾರೆ
ಕಾಂಗ್ರೆಸ್ಸಿಗರಿಗೆ ಅಧಿಕಾರ ಅನುಭವಿಸಲು ಜನ ಆಯ್ಕೆ ಮಾಡಿಲ್ಲ, ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಿ ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ನಿರೀಕ್ಷೆಯಲ್ಲಿ ಚುನಾಯಿಸಿದ್ದಾರೆ, ಆದರೆ ಜನರ ನಿರೀಕ್ಷೆ, ಅಪೇಕ್ಷೆಗಳೆಲ್ಲವೂ ಮಣ್ಣು ಪಾಲಾಗುತ್ತಿವೆ. ಸ್ವಪ್ರತಿಷ್ಠೆ, ಸ್ವಾರ್ಥ, ಭ್ರಷ್ಟಾಚಾರದಲ್ಲಿ ಮುಳುಗೇಳುವ ಗುರಿಯನ್ನು ಮಾತ್ರ ಈ ಕಾಂಗ್ರೆಸ್ ಸರ್ಕಾರ ಇಟ್ಟುಕೊಂಡಂತೆ ಕಾಣುತ್ತಿದೆ. 2025 ಜನತೆ ಹಾಗೂ ರಾಜ್ಯದ ಪಾಲಿಗೆ ಕರಾಳ ವರ್ಷವಾಗುವ ಸೂಚನೆ ಕಾಣುತ್ತಿದೆ, ಜನಾಕ್ರೋಶ ಭುಗಿಲೇಳುವ ಮುನ್ನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ಕೊಟ್ಟು ತಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಲಿ ಎಂದು ಹೇಳಿದ್ದಾರೆ.
Previous Articleಸರ್ಕಾರದ ವಿರುದ್ಧ ಸಬ್ ರಿಜಿಸ್ಟ್ರಾರ್ ಗಳ ಸಮರ
Next Article ರಾಜ್ಯ ಕಾಂಗ್ರೆಸ್ ನಾಯಕರಿಗೆ ಜಯಚಂದ್ರ ಕಿವಿಮಾತು

